ಖರ್ಗೆಗೆ ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಗಳಲ್ಲಿ ನಂಬಿಕೆಯಿಲ್ಲ; ನಡ್ಡಾ ಕಿಡಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಗಳಲ್ಲಿ ನಂಬಿಕೆಯಿಲ್ಲ. ಅರಾಜಕತೆಯನ್ನು ಸೃಷ್ಟಿಸಲಷ್ಟೇ ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಮಾಡಿರುವ ಆರೋಪ ಖಂಡನೀಯ ಮತ್ತು ದುರಾದೃಷ್ಟಕರ ಎಂದಿರುವ ನಡ್ಡಾ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸದನದಲ್ಲಿ ಮಾತನಾಡಲು ಸಾಕಷ್ಟು ಅವಕಾಶಗಳನ್ನು ನೀಡಲಾಗಿದೆ. ಆದರೆ ಅವರು ನಿರಾಕರಿಸಿದ್ದಾರೆ. ಅವರನ್ನು ಸಭಾಪತಿ ಕೊಠಡಿಗೆ ಬರುವಂತೆ ಆಹ್ವಾನಿಸಲಾಯಿತು. ಅದನ್ನೂ ಅವರು ನಿರಾಕರಿಸಿದರು ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಸತ್‌ ಕಲಾಪ ಸುಸೂತ್ರವಾಗಿ ನಡೆಯಲು ಕಾಂಗ್ರೆಸ್ ಬಯಸುವುದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಅವರಿಗೆ ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಗಳಲ್ಲಿ ನಂಬಿಕೆಯಿಲ್ಲ. ಅರಾಜಕತೆಯನ್ನು ಸೃಷ್ಟಿಸಲಷ್ಟೇ ಪ್ರಯತ್ನಿಸುತ್ತಿದ್ದಾರೆ ಎಂದು ದೂರಿರುವ ನಡ್ಡಾ, ಇಂದು ಇಡೀ ದೇಶವೇ ಜಾರ್ಜ್ ಸೊರೋಸ್ ಮತ್ತು ಗಾಂಧಿ ಕುಟುಂಬದ ನಡುವಿನ ಸಂಬಂಧದ ಬಗ್ಗೆ ತಿಳಿಯಲು ಬಯಸುತ್ತಿದೆ. ಈ ವಿಚಾರದಿಂದ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಇಂತಹ ಪ್ರಯತ್ನಗಳನ್ನು ಮಾಡುತ್ತಿದೆ ಎಂದೂ ಅರ್ಪಾಯೆ ಮಾಡಿದ್ದಾರೆ.