ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ನಿಧನ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಸಂತಾಪ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಿಧನ ಹೊಂದಿದ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರ ಅಗಲಿಕೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಶೋಕ ಸಂದೇಶದಲ್ಲಿ, ವಿಧಾನ ಪರಿಷತ್ತಿನ ಸದಸ್ಯರಾಗಿ ಕ್ರೀಯಾಶೀಲವಾಗಿ ಕಾರ್ಯ ನಿರ್ವಹಿಸಿರುವ ಡೇವಿಡ್ ಸಿಮಿಯೋನ್ ಮೂರು ವರ್ಷಗಳ ಕಾಲ ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಹಾಗೂ ಸುಮಾರು ಒಂದೂವರೆ ವರ್ಷಗಳ ಕಾಲ ಹಂಗಾಮಿ ಸಭಾಪತಿಯಾಗಿ ಸದನವನ್ನು ಸಮರ್ಥವಾಗಿ ನಿರ್ವಹಿಸಿದ್ದನ್ನು ಬಸವರಾಜ ಹೊರಟ್ಟಿರವರು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ.

ಎಲ್ಲಾ ಜನಾಂಗಗಳ ಬಗೆಗೂ ಅತೀವ ಪ್ರೀತಿ , ಕಾಳಜಿ ಹೊಂದಿದ್ದ ಅವರು, ಉತ್ತರ ಕರ್ನಾಟಕ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಸೇರಿದಂತೆ ಎಲ್ಲಾ ರಂಗಗಳ ಅಭಿವೃದ್ದಿಗೆ ಅರ್ಹನಿಶಿ ಶ್ರಮಿಸಿರುವ ಡೇವಿಡ್ ಸಿಮಿಯೋನ್ ತಮ್ಮ ಸರಳತೆ ಹಾಗೂ ಸಜ್ಜನಿಕೆಯಿಂದ ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಬಸವರಾಜ ಹೊರಟ್ಟಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಡೇವಿಡ್ ಸಿಮಿಯೋನ್ ಅವರ ಅಗಲಿಕೆಯಿಂದ ಕನ್ನಡ ನಾಡು ಉತ್ತಮ ಸಮಾಜ ಸೇವಕ ಹಾಗೂ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ ಎಂದು ಕಂಬನಿ ಮಿಡಿದಿರುವ ಬಸವರಾಜ ಹೊರಟ್ಟಿ, ಡೇವಿಡ್ ಸಿಮಿಯೋನ್ ಅವರ ಅಪಾರ ಅಭಿಮಾನಿಗಳು, ಬಂಧು ಮಿತ್ರರು ಹಾಗೂ ಕುಟುಂಬ ವರ್ಗದವರಿಗೆ ಭಗವಂತ ಅವರ ಅಗಲಿಕೆಯ ದುಖಃವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.