ಬೆಳಗಾವಿ ಸುವರ್ಣ ವಿಧಾನಸೌಧ: ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿಗಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪಶ್ಚಿಮಘಟ್ಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ 6 ಅಧಿಸೂಚನೆ ಹೊರಡಿಸಿದ್ದು, 2024ರಲ್ಲಿ 6ನೇ ಅಧಿಸೂಚನೆ ಆದ ಬಳಿಕ 10 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಿ ನಂತರ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲೂ ಪರಾಮರ್ಶಿಸಿ, ಸಚಿವ ಸಂಪುಟದಲ್ಲಿ ಕಸ್ತೂರಿ ರಂಗನ್ ವರದಿಗೆ ರಾಜ್ಯದ ಒಪ್ಪಿಗೆ ಇಲ್ಲ ಎಂದು ನಿರ್ಣಯಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕಸ್ತೂರಿ ರಂಗನ್ ವರದಿಯಲ್ಲಿ ರಾಜ್ಯದ ಪಶ್ಚಿಮಘಟ್ಟದ ಸುಮಾರು 20,668 ಚದರ ಕಿಲೋ ಮೀಟರ್ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಶಿಫಾರಸು ಮಾಡಲಾಗಿದೆ ಈ ಪೈಕಿ 16ಸಾವಿರ ಚದರ ಕಿಲೋ ಮೀಟರ್ ಈಗಾಗಲೇ ರಾಜ್ಯದ ವನ್ಯಜೀವಿಧಾಮಗಳು, ರಾಷ್ಟ್ರೀಯ ಉದ್ಯಾನ, ಹುಲಿ ಸಂರಕ್ಷಿತ ಪ್ರದೇಶ, ರಕ್ಷಿತ ಅರಣ್ಯ ಪ್ರದೇಶದಲ್ಲಿದ್ದು, ಉಳಿದ 4 ಸಾವಿರ ಚದರ ಕಿಲೋ ಮೀಟರ್ ವ್ಯಾಪ್ತಿ ವರದಿಯಲ್ಲಿದೆ. ಆದರೆ ನಾವು ಇದನ್ನು ತಿರಸ್ಕರಿಸಿದ್ದು, ಈ ಭಾಗದ ಜನರಿಗೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.




