ಕರಾವಳಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್‌ಗೆ ಮಂಜುನಾಥ್ ಭಂಡಾರಿ ಮನವಿ

ಬೆಂಗಳೂರು: ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಸುದೀರ್ಘ ಬೇಡಿಕೆಗಳನ್ನು ಈಡೇರಿಸುವಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ₹5,000 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಸೇರಿಸುವಂತೆ ಅವರು ಒತ್ತಾಯಿಸಿದ್ದಾರೆ. ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪತ್ರದಲ್ಲಿನ ಪ್ರಮುಖ ಅಂಶಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ಸಂಪುಟ ಅಜೆಂಡಾದಲ್ಲಿ ಸೇರಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಕರಾವಳಿ ಭಾಗದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸುಧಾರಿತ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ, ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ, ರೈತರು ಹಾಗೂ ಮೀನುಗಾರರ ಆರ್ಥಿಕ ಸಬಲೀಕರಣಕ್ಕೆ ಅಗತ್ಯ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಮತ್ತು ಅನುದಾನ ನೀಡುವಂತೆ ಭಂಡಾರಿ ಮನವಿ ಮಾಡಿದ್ದಾರೆ.

ಪ್ರಮುಖ ಬೇಡಿಕೆಗಳು

  • ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ಕೃಷಿ ಡಿಪ್ಲೋಮಾ ಕಾಲೇಜನ್ನು ಮೇಲ್ದರ್ಜೆಗೇರಿಸಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ.
  • ಮಂಗಳೂರಿನ ಮೀನುಗಾರಿಕೆ ಕಾಲೇಜನ್ನು ಪ್ರತ್ಯೇಕ ಮೀನುಗಾರಿಕಾ ವಿಶ್ವವಿದ್ಯಾಲಯವಾಗಿ ಪರಿವರ್ತನೆ.
  • ಮೀನುಗಾರಿಕಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ‘ಕರ್ನಾಟಕ ಮೀನುಗಾರಿಕಾ ಪರಿಷತ್ತು’ ರಚನೆ.
  • ಮಂಗಳೂರಿನಲ್ಲಿ ಆಧುನಿಕ ಅಕ್ವಾಪಾರ್ಕ್ ಸ್ಥಾಪನೆ.
  • ಮೀನುಗಾರಿಕೆ ವೇಳೆ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ₹5 ಲಕ್ಷದಿಂದ ₹10 ಲಕ್ಷಕ್ಕೆ ಹೆಚ್ಚಿಸುವುದು.
  • ಮೀನುಗಾರಿಕಾ ಬೋಟ್‌ಗಳಿಗೆ ಡೀಸೆಲ್ ಸಬ್ಸಿಡಿ ಹೆಚ್ಚಳ.
  • ಪ್ರಮುಖ ಮೀನುಗಾರಿಕಾ ಕೇಂದ್ರಗಳಲ್ಲಿ ಆಧುನಿಕ ಕೋಲ್ಡ್ ಸ್ಟೋರೇಜ್‌ಗಳ ನಿರ್ಮಾಣ.
  • ಮಂಗಳೂರಿನಲ್ಲಿ ಸುಧಾರಿತ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ.
  • ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ 356 ಎಕರೆ ಜಮೀನು ಅಧಿಕೃತವಾಗಿ ಮಂಜೂರು ಮಾಡಿ, ಪ್ರಾಧಿಕಾರವನ್ನು ಮಂಡಳಿಯಾಗಿ ಪರಿವರ್ತಿಸುವುದು.
  • ಪಿಲಿಕುಳದ ಸ್ಥಗಿತಗೊಂಡಿರುವ ಅರ್ಬನ್ ಇಕೋ ಪಾರ್ಕ್ ಕಾಮಗಾರಿಗೆ ಬಾಕಿ ಇರುವ ₹12.60 ಕೋಟಿ ಅನುದಾನ ಬಿಡುಗಡೆ.
  • ಪ್ರಮುಖ ದೇವಾಲಯಗಳನ್ನು ಸಂಪರ್ಕಿಸುವ ‘ಕರಾವಳಿ ಟೆಂಪಲ್ ಟೂರಿಸಂ’ ಕಾರಿಡಾರ್ ಅಭಿವೃದ್ಧಿ.
  • ತಲಪಾಡಿಯಿಂದ ಬೈಂದೂರಿನವರೆಗೆ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ನಿರ್ಮಾಣ.
  • ಕರಾವಳಿಯಲ್ಲಿ ಸುಮಾರು 150 ಎಕರೆ ಜಾಗವನ್ನು ಪ್ರವಾಸೋದ್ಯಮ ವಲಯವಾಗಿ ಗುರುತಿಸಿ ಖಾಸಗಿ ಹೂಡಿಕೆಗೆ ಉತ್ತೇಜನ.
  • ಅಂತರರಾಷ್ಟ್ರೀಯ ಮಟ್ಟದ ಕನ್ವೆನ್ಷನ್ ಸೆಂಟರ್ ಹಾಗೂ ಮಕ್ಕಳ ಪಾರ್ಕ್‌ಗಳ ನಿರ್ಮಾಣ.
  • ಯಕ್ಷಗಾನ, ಕಂಬಳ ಹಾಗೂ ವಿವಿಧ ಜಾನಪದ ಕಲೆಗಳ ಸಂರಕ್ಷಣೆಗೆ ವಾರ್ಷಿಕ ₹10 ಕೋಟಿ ವಿಶೇಷ ಅನುದಾನ.
  • ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ₹7 ಕೋಟಿ ವೆಚ್ಚದ ಅಂತರರಾಷ್ಟ್ರೀಯ ಮಟ್ಟದ ಕಬಡ್ಡಿ ಕ್ರೀಡಾಂಗಣ ನಿರ್ಮಾಣಕ್ಕೆ ಅನುಮೋದನೆ.
  • ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ.
  • ಉಡುಪಿ ಜಿಲ್ಲೆಯ ಬೆಳಪು ಗ್ರಾಮದಲ್ಲಿ ‘ಭಾರತ್ ಜೋಡೋ ಕ್ರೀಡಾ ವಿಶ್ವವಿದ್ಯಾಲಯ’ ಸ್ಥಾಪನೆ.

ಕರಾವಳಿಯ ಆರ್ಥಿಕತೆ, ಮೀನುಗಾರಿಕೆ, ಪ್ರವಾಸೋದ್ಯಮ, ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಭಂಡಾರಿ ಮನವಿ ಮಾಡಿದ್ದಾರೆ.