ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

ಬೆಂಗಳೂರು: ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ವಿರೋಧ ಪಕ್ಷಗಳನ್ನು ಬೆದರಿಸಿ ಹಿಡಿತಕ್ಕೆ ತರುವ ಪ್ರಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಸಿ.ಟಿ. ರವಿ ಅವರು ಯಾವುದೇ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಆದರೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಪೊಲೀಸರು ಮುಟ್ಟಿ ನೋಡಲಿ ಎಂದು ಅಶೋಕ್ ಸವಾಲು ಹಾಕಿದರು.

ಸದ್ಯದಲ್ಲೇ ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಪರವಾಗಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಾಗುವುದು ಎಂದು ಅವರು ತಿಳಿಸಿದರು.

ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ, ಬಿಜೆಪಿ ನಾಯಕರ ವಿರುದ್ಧ ಮಾತ್ರ ಸುಳ್ಳು ಪ್ರಕರಣ ದಾಖಲಿಸುತ್ತಿದೆ ಎಂದು ಆರೋಪಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ನಿವೃತ್ತಿ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಅಶೋಕ್, ಇದು ಹಾಸ್ಯಾಸ್ಪದವಾಗಿದೆ. ಈ ಹಿಂದೆಯೂ ಹಲವು ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರೂ ಮತ್ತೆ ಸ್ಪರ್ಧಿಸಿದ್ದಾರೆ. ಅವರು ಚುನಾವಣೆಗೆ ನಿಲ್ಲದಿದ್ದರೂ ರಾಜ್ಯದ ರಾಜಕೀಯ ನಡೆಯುತ್ತಲೇ ಇರುತ್ತದೆ ಎಂದು ವ್ಯಂಗ್ಯವಾಡಿದರು.