ಡಿಕೆ ಶಿವಕುಮಾರ್ ನೀವು ಶಾಸಕ, ಮಂತ್ರಿ, ಡಿಸಿಎಂ ಆದರೇನು ? ನೀನೊಬ್ಬ ಮನುಷ್ಯ ಅಷ್ಟೇ: ಜೆಡಿಎಸ್ ಕುಟುಕು

ಬೆಂಗಳೂರು: ಡಿಕೆ ಶಿವಕುಮಾರ್ ಅವರೇ, ನೀವು ಶಾಸಕರಾದರೇನು ? ‌ಮಂತ್ರಿಯಾದರೇನು ? ಡಿಸಿಎಂ ಆದರೇನು ? ನೀನೊಬ್ಬ ಮನುಷ್ಯ ಅಷ್ಟೇ ಎಂಬುದಾಗಿ ಜೆಡಿಎಸ್ ಕುಟುಕಿದೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, ಜನರಿಂದ ಆಯ್ಕೆಯಾದ ನೀವು, ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ನಿಮ್ಮ ಆದ್ಯ ಕರ್ತವ್ಯ. ಅದನ್ನು ಬಿಟ್ಟು ಪ್ರಶ್ನೆ ಮಾಡಿದವರಿಗೆ ಧಮ್ಕಿ, ಬೆದರಿಕೆ ಹಾಕುವುದು ಸಂವಿಧಾನದ ಪ್ರಕಾರ ಅಪರಾಧ ಎಂದಿದೆ.

ನಾವು 80ರ ದಶಕದಲ್ಲಿ ಜೀವಿಸುತ್ತಿಲ್ಲ ಡಿಕೆಶಿ ಅವರೇ, ನಿಮ್ಮ ಬಳಿ ದುಡ್ಡಿದ್ದರೆ, ಅದು ” ನಾಯಿ ಮೊಲೆ ಹಾಲಿದ್ದಂಗೆ ”. ಯಾರಿಗೂ ಪ್ರಯೋಜನವಿಲ್ಲ. ಅಧಿಕಾರದ ಮದ, ದಬ್ಬಾಳಿಕೆ ನೆತ್ತಿಗೇರಿದೆ ಕೊತ್ವಾಲ್ ಶಿಷ್ಯನ ರೌಡಿಸಂ, ಗೂಂಡಾ ಪ್ರವೃತ್ತಿಗೆ ಕಡಿವಾಣ ಹಾಕದಿರುವುದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಇಂತಹವರು ಜನಪ್ರತಿನಿಧಿಯಾಗಿ ಮುಂದುವರಿಯಲು ನಾಲಾಯಕ್ಕು ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದೆ.

ಸಂವಿಧಾನದ ರಕ್ಷಣೆ ಮಾಡುತ್ತೇವೆ ಎನ್ನುವ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿ, ಮೊದಲು ಡಿಕೆಶಿಯಂತಹ ರೌಡಿ ರಾಜಕಾರಣಿಯ ರಾಜೀನಾಮೆ ಪಡೆದು, ಬಳಿಕ ದೇಶದ ಜನತೆಗೆ ಸಂವಿಧಾನದ ಬಗ್ಗೆ ಪಾಠ ಮಾಡುವುದು ಒಳಿತು ಎಂಬುದಾಗಿ ತಿಳಿಸಿದೆ.