ಉಗ್ರರ ದಾಳಿಗೆ ಬಲಿಯಾಗಿದ್ದ ಶಿವಮೊಗ್ಗದ ಮಂಜುನಾಥ್ ಪಂಚಭೂತಗಳಲ್ಲಿ ಲೀನ

ಶಿವಮೊಗ್ಗ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ್ದಂತ ಗುಂಡಿನ ದಾಳಿಗೆ ಶಿವಮೊಗ್ಗ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವನ್ನಪ್ಪಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿಸಲಾಯಿತು.

ಏಪ್ರಿಲ್.22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರು. ಪ್ರವಾಸಿಗರ ಮೇಲೆ ನಡೆಸಿದಂತ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ ಕರ್ನಾಟಕದ  ಇಬ್ಬರು ಸೇರಿದ್ದರು. ಬೆಂಗಳೂರಿನ ಒಬ್ಬರು ಹಾಗೂ ಶಿವಮೊಗ್ಗದ ಮಂಜುನಾಥ್ ಕೂಡ ಸೇರಿದ್ದರು.

ನಿನ್ನೆ ಸಂಜೆ ಮಂಜುನಾಥ್ ಮೃತದೇಹ ಶಿವಮೊಗ್ಗಕ್ಕೆ ಆಗಮಿಸಿತ್ತು. ಇಂದು ಅಂತಿಮ ದರ್ಶನದ ಬಳಿಕ ಸಕಲ ಪೊಲೀಸ್ ಗೌರವಗಳೊಂದಿಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಮಂಜುನಾಥ್ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದರು. ಬ್ರಾಹ್ಮಣ ಸಂಪ್ರದಾಯದಂತೆ ಮಂಜುನಾಥ್ ಅಂತ್ಯಕ್ರಿಯೆ ನೆರವೇರಿತು. ಈ ಮೂಲಕ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.