ನಿಗದಿತ ಅವಧಿಗಿಂತ ಮುಂಚಿತವಾಗಿ ಸಮೀಕ್ಷೆ ಮುಗಿಸಿದ ಶಿಕ್ಷಕರಿಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

ಶಿವಮೊಗ್ಗ: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಆರಂಭವಾಗಿ ವಾರದಲ್ಲಿಯೇ ಜಿಲ್ಲೆಯ 25 ಜನ ಶಿಕ್ಷಕರು ತಮಗೆ ನೀಡಿದ ಸಮೀಕ್ಷೆಯ ಗುರಿಯನ್ನು ಮುಗಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಇವರೆಲ್ಲರಿಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಕಚೇರಿಯಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

ಸಮೀಕ್ಷೆ ಏಕಕಾಲಕ್ಕೆ ಆರಂಭವಾದ ಹಿನ್ನಲೆ ಗಣತಿದಾರರಿಗೆ ಎದುರಾದ ಕೆಲವು ತಾಂತ್ರಿಕ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಿ ತಕ್ಷಣ ಸರಿಪಡಿಸಲಾಗಿತ್ತು.

ಇದರಿಂದಾಗಿ ಶಿಕ್ಷಕರು ದಿನಕ್ಕೆ 12 ರಿಂದ 14 ಗಂಟೆಗಳ ಕಾಲ ಕಾರ್ಯನಿರ್ವಹಿಸಿ ತಮಗೆ ವಹಿಸಿದ 110 ರಿಂದ 125 ಮನೆಗಳ ಸಮೀಕ್ಷೆಯನ್ನು ಕೇವಲ ಒಂದೇ ವಾರದಲ್ಲಿ ಪೂರ್ಣಗೊಳಿಸುವ ಮೂಲಕ ಶ್ರದ್ಧೆಯಿಂದ ಕೆಲಸ ಮಾಡಿದರೆ ಎಲ್ಲವೂ ಸುಲಭ ಸಾಧ್ಯ ಎಂದು ತಿಳಿಸಿದ್ದಾರೆ. ನಿಜಕ್ಕೂ ಅವರ ಈ ಕಾರ್ಯ ಶ್ಲಾಘಿಸಿದ್ದಾರೆ.

ಸಮೀಕ್ಷೆಯಲ್ಲಿ ತೊಡಗಿಕೊಂಡ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಹಕರಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿರುದ್ಧ ಬೊಬ್ಬೆ ಹೊಡೆದ ವಿರೋಧ ಪಕ್ಷಗಳಿಗೆ ನಿಮ್ಮ ಕಾರ್ಯವೇ ಉತ್ತರವಾಗಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ನಾವು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಪ್ರಣಾಳಿಕೆಯಂತೆ ಜನಪರ ಕಾರ್ಯಕ್ರಮಗಳನ್ನು ಪಕ್ಷಾತೀತವಾಗಿ ಜಾರಿಗೆ ತಂದಿದ್ದೇವೆ. ಜೊತೆಗೆ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.