ಬೆಂಗಳೂರು: ಇಂದು ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ (ಎಸ್.ಎಸ್.ಕೆ) ಭವನದಲ್ಲಿ “2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆ”ಯ ಪೂರ್ವಸಿದ್ದತೆಗಳ ಕುರಿತು ಶಿಕ್ಷಣ ಇಲಾಖೆ, ಗೃಹ ಇಲಾಖೆ ಹಾಗೂ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆನಡೆಸಲಾಯಿತು.
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಸೇರಿದಂತೆ ಜಿಲ್ಲಾಮಟ್ಟದ ಉನ್ನತ ಅಧಿಕಾರಿಗಳೊಂದಿಗೆ “ಪರೀಕ್ಷಾ ಸಂಬಂಧ ಕೈಗೊಗೊಳ್ಳಬೇಕಾಗಿರುವ ಭದ್ರತೆಗಳ” ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಕೆಲವು ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
ಈ ಸಭೆಯಲ್ಲಿ ಚರ್ಚಿಸಿ, ಕೈಗೊಂಡಿರುವ ಪ್ರಮುಖ ಭದ್ರತಾ ಕ್ರಮಗಳ ಹೈಲೈಟ್ಸ್ ಹೀಗಿದೆ..
♦️ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 01ರಿಂದ 20ರ ವರೆಗೆ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯು ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ನಡೆಯಲಿದ್ದು ಅಗತ್ಯ ಕ್ರಮ ಕೈಗೊಳ್ಳುವ ಕುರಿತು.
♦️ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಕುರಿತು.
♦️ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳುವುದು ಅಥವಾ ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾವಹಿಸುವ ಬಗ್ಗೆ.
♦️ಪರೀಕ್ಷಾ ಕೇಂದ್ರದ 200ಮೀ ಸುತ್ತಲು ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡುವುದು. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್ ಹಾಗೂ ಗೇಮ್ಸ್ ಸೆಂಟರ್ ಕೇಂದ್ರಗಳ ಮೇಲೆ ವಿಶೇಷ ನಿಗಾವಹಿಸುವ ಕುರಿತು.
♦️ವಿದ್ಯಾರ್ಥಿಗಳು ಹೆಚ್ಚಿನ ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಬರೆಯುವಂತಹ ವಾತಾವರಣ ಕಲ್ಪಿಸುವ ಕುರಿತು.
♦️ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸುವುದು.
♦️ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡುವ ಕುರಿತು.
♦️ಪರೀಕ್ಷಾ ಅಕ್ರಮ ನಡೆಯದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು.
♦️ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ವಿವಿಧ ರೀತಿಯ ಫೇಕ್ ಪೋಸ್ಟ್ ಗಳ ಬಗ್ಗೆ ಗಮನ ಹರಿಸಿ ಅವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ.
♦️ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯಿಂದ ಪರೀಕ್ಷೆಗೆ ಬೇಕಾದಂತಹ ಅಗತ್ಯ ಪೂರಕ ವ್ಯವಸ್ಥೆಯನ್ನು ಮೊದಲೇ ಕಲ್ಪಿಸಿಕೊಳ್ಳುವ ಬಗ್ಗೆ.
♦️ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳು 24/7 ಪೊಲೀಸ್ ಭದ್ರತೆ ಮತ್ತು ಸಿಸಿ ಕ್ಯಾಮೆರಾ ನಿಗಾದಲ್ಲಿ ಇರಿಸುವ ಬಗ್ಗೆ ಸೂಚಿಸಿದೆ.
♦️ವೆಬ್ ಕಾಸ್ಟಿಂಗ್ ಜಾರಿಯಲ್ಲಿರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕ್ಯಾಮೆರಾ, ವಿದ್ಯುತ್ ಹಾಗೂ ನೆಟ್ವರ್ಕ್ ಸದಾ ಸುಸ್ಥಿತಿಯಲ್ಲಿರುವಂತೆ ಜಾಗೃತಿವಹಿಸುವ ಕುರಿತು.
♦️ರಾಜ್ಯದಲ್ಲಿರುವ ಎಲ್ಲಾ ಪರೀಕ್ಷಾ ಕೇಂದ್ರಗಳ ಬಗ್ಗೆ ಆಯಾ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜವಬ್ದಾರಿಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತಂತೆ ಇನ್ನೂ ಅನೇಕ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ ಮಹೇಶ್, ಆಯುಕ್ತರಾದ ತ್ರಿಲೋಕ ಚಂದ್ರ, ಪದವಿ ಪೂರ್ವ ನಿರ್ದೇಶಕರಾದ ಸಿಂಧೂ ಬಿ ರೂಪೇಶ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರಾದ ಬಸವರಾಜೇಂದ್ರ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.




