ನಕಲಿ ರಾಷ್ಟ್ರೀಯವಾದಿ ಬಿಜೆಪಿಯಿಂದ ದೇಶಭಕ್ತಿ ಕಲಿಯುವ ಅಗತ್ಯವಿಲ್ಲ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಭಾರತದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಕಾಂಗ್ರೆಸ್ ಪಕ್ಷ, ನಕಲಿ ರಾಷ್ಟ್ರೀಯವಾದಿ ಬಿಜೆಪಿಯಿಂದ ರಾಷ್ಟ್ರಭಕ್ತಿ, ದೇಶಪ್ರೇಮ ಕಲಿಯುವ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ರಾಜ್ಯ ಸರ್ಕಾರ, ರಾಷ್ಟ್ರಪತಿ, ಪ್ರಧಾನಿ ಹಾಗೂ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮ ಹೊರತುಪಡಿಸಿ, ಸರ್ಕಾರದ ಇತರ ಸಮಾರಂಭಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಆದೇಶಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

ಬ್ರಿಟಿಷರ ದಾಸ್ಯದಿಂದ ಭಾರತ ಮಾತೆಯನ್ನು ಬಂಧಮುಕ್ತಗೊಳಿಸಲು ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡಿ, ಇಡೀ ದೇಶದ ಉತ್ಸಾಹಿ ಯುವಕರಲ್ಲಿ ದೇಶಪ್ರೇಮ ತುಂಬಿದ್ದೇ ಕಾಂಗ್ರೆಸ್ ಎಂದರು.

ಸ್ವಾತಂತ್ರ್ಯಾಪೂರ್ವದಲ್ಲಿ1937ರ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿಯೇ 2 ಚರಣ ಹಾಡಬೇಕು ಎಂಬು ನಿಲುವು ತೆಗೆದುಕೊಳ್ಳಲಾಗಿದೆ. ಇದಕ್ಕೆ ನಮ್ಮ ಸರ್ಕಾರ ಇಂದಿಗೂ ಬದ್ಧವಾಗಿದೆ. ಇಷ್ಟು ದಿನಗಳ ಕಾಲ ಇಲ್ಲದ 6 ಚರಣದ ಬಗ್ಗೆ ಈಗ ಕಣ್ಣು ತೆರೆದಿರುವ ಬಿಜೆಪಿ 90 ವರ್ಷ ಏಕೆ ಸುಮ್ಮನ್ನಿತ್ತು ಎಂದು ಖಂಡ್ರೆ ಪ್ರಶ್ನಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಅನುದಾನವನ್ನೂ ನೀಡುತ್ತಿಲ್ಲ. ಬಿಜೆಪಿಯವರು ರಾಜ್ಯದ ಹಿತದೃಷ್ಟಿಯಿಂದ ಕೇಂದ್ರದ ಮೇಲೆ ಒತ್ತಡ ಹೇರಿ ಹಣ ಕೊಡಿಸುವ ಕಾರ್ಯ ಮಾಡುವ ಬದಲು, ಇಂತಹ ವಿಚಾರ ಇಟ್ಟುಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.