ಕೌನ್ಸೆಲಿಂಗ್ ಮೂಲಕ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ, SDA ವರ್ಗಾವಣೆ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: 2024 – 25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ರಾಜ್ಯದಲ್ಲಿ ಮೊದಲ ಬಾರಿಗೆ ಪ್ರಸ್ತುತ ಸಾಲಿನಲ್ಲಿ ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್ – 1 ಮತ್ತು ಗ್ರೇಡ್ -2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸೆಲಿಂಗ್‌ ಮೂಲಕ ಕೈಗೊಳ್ಳುವ ಪ್ರಕ್ರಿಯೆಯನ್ನು ಜುಲೈ 22ರಂದು ಆರಂಭಿಸಲಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕೌನ್ಸೆಲಿಂಗ್‌ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ನೌಕರರುಗಳಿಗೆ ಆನ್‌ ಲೈನ್‌ ಮೂಲಕ ತಮ್ಮ ಆದ್ಯತೆಯ ಸ್ಥಳಗಳನ್ನು ಆಯ್ಕೆ ಮಾಡುವ ಅವಕಾಶ ಇರಲಿದೆ, ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ನೌಕರರು ವರ್ಗಾವಣೆಗೆ ಅರ್ಹರಾಗಿದ್ದು, ವಿಶೇಷಚೇತನರು ಹಾಗೂ ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ನಿಯಮಗಳಲ್ಲಿ ವಿನಾಯತಿ ನೀಡಲಾಗಿದೆ, 31 ಜಿಲ್ಲೆಗಳಿಂದ ಒಟ್ಟು 2697 ನೌಕರರು ವರ್ಗಾವಣೆಗಾಗಿ ಅರ್ಜಿಗಳು ಸಲ್ಲಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ನೌಕರರು ಸಲ್ಲಿಸಿದ ಅರ್ಜಿ, ಸ್ಥಳದ ಆಯ್ಕೆಗಳನ್ನು ಪರಿಗಣಿಸಿ ಆನ್ ಲೈನ್ ಮೂಲಕ ಕೌನ್ಸೆಲಿಂಗ್‌ ನಡೆಸಿ ಜಿಲ್ಲಾ ಪಂಚಾಯತಿ ಹಂತದಲ್ಲಿ ವರ್ಗಾವಣೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ವಿಶೇಷ ಪ್ರಕರಣಗಳ ಕೌನ್ಸೆಲಿಂಗ್‌ನ್ನು ಈ ತಿಂಗಳ 24ರಂದು ನಡೆಸಲಾಗುವುದು. ಎರಡನೆಯ ಹಂತದಲ್ಲಿ ಸ್ಥಳ ನಿರೀಕ್ಷಣೆಯಲ್ಲಿರುವ ಮತ್ತು ಕಡ್ಡಾಯ ವರ್ಗಾವಣೆ ಪ್ರಕರಣಗಳ ಕೌನ್ಸೆಲಿಂಗ್‌ ಈ ತಿಂಗಳ 25ರಂದು ನಡೆಯುವುದು. ಸಾಮಾನ್ಯ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್‌ ಜುಲೈ 28ರಂದು ನಡೆಯುವುದು ಎಂದೂ ಸಚಿವರು ಹೇಳಿದ್ದಾರೆ.

ಕನಿಷ್ಠ ಸೇವಾವಧಿ ಪೂರೈಸಿರುವ ನೌಕರರಿಗೆ ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ನಡೆಸಿ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ ದಕ್ಷತೆ ಹೆಚ್ಚಿಸುವಲ್ಲಿ ಇದು ಸಹಕಾರಿಯಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತು ಪಂಚಾಯತ್‌ ರಾಜ್‌ ಸಚಿವರು ತಿಳಿಸಿದ್ದಾರೆ.

ಅಂತರಜಿಲ್ಲೆ ವರ್ಗಾವಣೆಗೆ ಅರ್ಹರಿರುವ ನೌಕರರ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಸಿ ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಕೌನ್ಸೆಲಿಂಗ್‌ನಲ್ಲಿ ಪಾಲ್ಗೊಂಡ ಅಭ್ಯರ್ಥಿಗಳಿಗೆ ಅವರ ಆಯ್ಕೆಯ ಜಿಲ್ಲೆಗಳಿಗೆ ವರ್ಗಾವಣೆ ಆದೇಶ ನೀಡುವ ಮೂಲಕ ಚಾಲನೆ ನೀಡಿದರು.